Sagara News

ಜನಾರ್ದನ ಕೆ ಎಂ ಮರವಂತೆ ಸಾರಥ್ಯದಲ್ಲಿ….!

ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿ ಬಂಧನ

ಉಡುಪಿ: ಕಾಪು ತಾಲೂಕು ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿ ನಡೆದ ಪ್ರಿನ್ಸ್ ಎಂಟರ್‌ಪ್ರೈಸಸ್‌ ಮಾಲಕ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

2026ರ ಆಗಸ್ಟ್ 7ರಂದು ಮಧ್ಯಾಹ್ನ 3.45ರ ಸುಮಾರಿಗೆ ಮೋಟಾರ್ ಸೈಕಲ್‌ನಲ್ಲಿ ಬಂದ ಆರೋಪಿಗಳ ಪೈಕಿ ಸಹಸವಾರನು ಪಿಸ್ತೂಲ್‌ನಿಂದ ಡೇವಿಡ್ ಡಿಸೋಜಾ ಅವರ ತಲೆಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ. ಈ ಕುರಿತು ಶಿರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದ ಆರೋಪಿಗಳಾದ ಅನ್ನೋಲ್ ರಸ್ತೋಗಿ ಹಾಗೂ ಜಿಯಾಹುಲ್ ವಾಜುಲ್ ಶೇಖ್‌ ಅಲಿಯಾಸ್‌ ದೀಪಕ್ ಅವರನ್ನು ಈಗಾಗಲೇ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಕರಣದ ಮೊದಲ ಆರೋಪಿ ರಾಜು ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರ್ಕಾರಿ ನೌಕರರ ಮೇಲೆ ನಡೆದ ಕೊಲೆ ಯತ್ನ ಪ್ರಕರಣದಲ್ಲಿ ಗಾಯಗೊಂಡಿದ್ದು, ಅಜ್ಜರಕಾಡು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಆತನನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಈ ನಡುವೆ ತಲೆಮರೆಸಿಕೊಂಡಿದ್ದ ಸೂರಜ್ ಕುಮಾರ್ (31), ಅರ್ಜುನ್ ಪ್ರಸಾದ್ ಅವರ ಪುತ್ರ, ಕಟ್ನಾರಿ, ಶೇಖ್‌ಪುರ, ಬಿಹಾರ ರಾಜ್ಯ ಎಂಬಾತನನ್ನು ಆರೋಪಿಗಳ ಪತ್ತೆಗಾಗಿ ವಿಶೇಷ ಕರ್ತವ್ಯದಲ್ಲಿ ತೆರಳಿದ್ದ ಕುಂದಾಪುರ ಪೊಲೀಸರು ಉತ್ತರಾಖಂಡ ರಾಜ್ಯದ ನೈನಿತಾಲ್‌ ಜಿಲ್ಲೆಯ ಹಾನಿ ಪ್ರದೇಶದ ಬಳಿ ವಶಕ್ಕೆ ಪಡೆದಿದ್ದಾರೆ.

ನಂತರ ಆರೋಪಿಯನ್ನು ಪ್ರಕರಣದ ತನಿಖಾಧಿಕಾರಿಯವರ ಮುಂದೆ ಹಾಜರುಪಡಿಸಿ ಬಂಧಿಸಲಾಗಿದ್ದು, ಆತನಿಂದ ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಸೂರಜ್ ಕುಮಾರ್‌ನನ್ನು ಆಗಸ್ಟ್ 20ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಪ್ರಕರಣದ ತನಿಖೆ ಮುಂದುವರಿದಿದೆ.

About The Author

Leave a Reply

Your email address will not be published. Required fields are marked *